ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿಬಂಧು ಸ್ವಸಹಾಯ ಸಂಸ್ಥೆಗಳ ಒಕ್ಕೂಟ ಕೇಪು ವಲಯ, ಜನಜಾಗೃತಿ ವೇದಿಕೆ ಕೇಪು ವಲಯ ಇವರ ವತಿಯಿಂದ ಅಡ್ಯನಡ್ಕ ಜನತಾ ಪ್ರೌಢಶಾಲೆ ಹಾಗೂ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಆಗಸ್ಟ್ 3ರಂದು ನಡೆಯಿತು. ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಶ್ರೀ ನಂದಕುಮಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರವಿದೆ. ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಹೇಳಿದರು. ಜನತಾ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀ ಎಸ್. ರಾಜಗೋಪಾಲ ಜೋಶಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಪು ವಲಯದ ಮೇಲ್ವಿಚಾರಕಿ ಶ್ರೀಮತಿ ಕಾವ್ಯಶ್ರೀ ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವೀಣಾ ಟಿ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಗಾಯತ್ರಿ ಸ್ವಾಗತಿಸಿ, ಕೇಪು ವಲಯ ಮೇಲ್ವಿಚಾರಕರಾದ ಶ್ರೀ ಜಗದೀಶ್ ಪ್ರಸ್ತಾವನೆಗೈದರು. ಜನತಾ ಪ್ರೌಢಶಾಲೆಯ ವಿಜ್ಞಾನ ಸಹಶಿಕ್ಷಕಿ ಶ್ರೀಮತಿ ಕುಸುಮಾವತಿ ಕಾರ್ಯಕ್ರಮ ನಿರೂಪಿಸಿ, ಗಣಿತ ಸಹಶಿಕ್ಷಕಿ ಶ್ರೀಮತಿ ಗೀತಾ ಎಚ್. ಶೆಟ್ಟಿ ವಂದಿಸಿದರು.