ಬಸವಪಟ್ಟಣ ತಾಲೂಕಿನ ಶ್ರೀ ಮೃತ್ಯುಂಜಯ ಶಿವಾಚಾರ್ಯ ಮಹಾವಿದ್ಯಾಲಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಹೊಸಕೇರಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರವೀಣ್ ಗೌಡ್ರು, ತಾಲೂಕಿನ ಯೋಜನಾಧಿಕಾರಿಗಳಾದ ನವೀನ್ ಎನ್., ಜಿಲ್ಲಾ ಜನಜಾಗೃತಿ ಸದಸ್ಯರು, ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಲಾಯಿತು. ಮಾನ್ಯ ಯೋಜನಾಧಿಕಾರಿಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮುದಾಯದ ಹತ್ತು ಹಲವಾರು ಕಾರ್ಯಕ್ರಮವನ್ನು ಮಾಡುತ್ತಿದ್ದು ಅದರಲ್ಲಿ ಮಾದಕ ವಿರೋಧದ ಬಗ್ಗೆಯೂ ಕೂಡ ಮಾಹಿತಿ ನೀಡಲಾಗುತ್ತದೆ ಎಂದು ಮಾಹಿತಿ ಮಾರ್ಗದರ್ಶನ ನೀಡಿದರು. ಡಾ. ಪ್ರವೀಣ್ ಗೌಡ್ರು ರವರು ವಿದ್ಯಾರ್ಥಿಗಳ ಜೀವನ ಬಂಗಾರದಂತೆ ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ದುಶ್ಚಟ ವಿರುದ್ಧ ಹೋರಾಡಬೇಕು, ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗಬಾರದು ಎಂದು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮನು ದುಮ್ಮಿ ರವರು ವಿದ್ಯಾರ್ಥಿಗಳು ಸಮಾಜದಲ್ಲಿ ನಡೆಯುವ ತಪ್ಪನ್ನು ತಿದ್ದುವ ವ್ಯಕ್ತಿಗಳಾಗಿ ತಮ್ಮ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.
