ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬೆಳಗಾವಿ 1 ತಾಲೂಕಿನಲ್ಲಿ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಬೆಳಗಾವಿ ಹೊನಗಾ: ವ್ಯಸನ ಮುಕ್ತ ಜೀವನದಿಂದ ಮನುಷ್ಯನಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಸಿಗುತ್ತದೆ ಮತ್ತು ಅವರು ಮಾನಸಿಕ, ದೈಹಿಕ ಮತ್ತು ಆರ್ಥಿಕವಾಗಿ ಸುಧಾರಣೆಯಾಗಲು ಒಳ್ಳೆಯ ಅವಕಾಶ ಸಿಗುತ್ತದೆ ಎಂದು ವಿಜಯಾ ಅರ್ಥೋ ಮತ್ತು ಥರ್ಮೋ ಸಂಸ್ಥೆಯ ನಿರ್ದೇಶಕರಾದ ಡಾ.ರವಿ ಪಾಟೀಲ್ ರವರು ಹೇಳಿದರು. ತಾಲೂಕಿನ ಹೊನಗಾ ಗ್ರಾಮದ ಡಾ. ರವಿ ಪಾಟೀಲ್ ಆಯುರ್ವೇದಿಕ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಹೊನಗಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳಗಾವಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ 1770 ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮದ್ಯ- ಮಾದಕಗಳಿಂದ ದೂರವಾದರೆ ಸಮಾಜದಲ್ಲಿ ಶಾಂತಿ ನೆಲೆಸಲಿದೆ ನಿಮ್ಮೆಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಮದ್ಯವರ್ಜನ ಶಿಬಿರ ಆಯೋಜಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ನಿರ್ದೇಶಕರು ಆದ ಸತೀಶ ನಾಯ್ಕ್ ಅವರು ಮಾತನಾಡಿ “ದೇಶದ ಆರ್ಥಿಕ ಪ್ರಗತಿಗೆ ವ್ಯಸನ ಮುಕ್ತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕಿದೆ. ಆ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಯೋಜನಾ ಕಾರ್ಯಗಳು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
