ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯವಶ್ಯಕ : ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ

Janajagurthi Vedike Uncategorized

ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದು ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪಲ್ಲವಿ ಸಲಹೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು, ಪದವಿ ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ನಾಪೋಕ್ಲು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರುಗಳ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು ಪ್ರತೀ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ ಮಹನೀಯರನ್ನು ಮಾದರಿಯಾಗಿ ತೆಗೆದುಕೊಂಡು ಶ್ರದ್ಧೆಯಿಂದ ಕಲಿತರೆ ಜವಾಬ್ದಾರಿಯುತ ಸ್ಥಾನ ಹಾಗೂ ಹುದ್ದೆಯನ್ನು ಪಡೆಯಬಹುದು. ನಮ್ಮಲ್ಲಿ ಹಾಗೂ ನಮ್ಮ ಪರಿಸರದಲ್ಲಿ ಸ್ವಾಸ್ಥ್ಯ ಸಂಕಲ್ಪಕ್ಕೆ ಸ್ವಚ್ಛತೆ ಪ್ರಮುಖ ಅಸ್ತ್ರವಾಗಿದೆ. ಶಿಸ್ತು ಸಂಯಮ ಹಾಗೂ ದುಶ್ಚಟ ರಹಿತವಾಗಿ ಏಕಾಗ್ರತೆಯಿಂದ ನಡೆಸುವ ಜೀವನ ಸಮೃದ್ಧ ಆರೋಗ್ಯಕ್ಕೆ ಪೂರಕವಾಗಿದೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿಯ ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಇದುವರೆಗೆ ಕರ್ನಾಟಕ ರಾಜ್ಯದ 20,975 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ 20,51,947 ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 2000 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 33 ಸಾವಿರಕ್ಕೂ ಮಿಕ್ಕಿ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದರು.ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ 4.5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ 14.5 ಲಕ್ಷ ಜನರು ಮಾದಕ ದ್ರವ್ಯ ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ. ಪ್ರಪಂಚದ ಐದು ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು ( ಉದಾ : ಕ್ಯಾನ್ಸರ್, ಕ್ಷಯ, ಹೆಚ್.ಐ.ವಿ, ಹೃದಯ ಸಂಬಂಧಿತ ಖಾಯಿಲೆಗಳು, ಮತ್ತು ಮಾದಕ ವ್ಯಸನ ) ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ. ಹೆಚ್ಚು ಸಡಿಲ ಮಾಡಿದರೂ ಹೆಚ್ಚು ಬಿಗಿ ಮಾಡಿದರೂ ಒಡೆಯುವುದು ಮಡಿಕೆಯೆ. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.ಸಪ್ತ ವ್ಯಸನಗಳಲ್ಲಿ ಮಾದಕ ವ್ಯಸನ ಮೊದಲ ಮೆಟ್ಟಿಲು ಈ ಮೆಟ್ಟಿಲನ್ನು ಜಾರಿದರೆ ಉಳಿದೆಲ್ಲಾ ಮೆಟ್ಟಿಲುಗಳು ತನ್ನಿಷ್ಟಕ್ಕೆ ಜಾರುತ್ತವೆ. ( ಮಾದಕ ವ್ಯಸನ, ಮಾಂಸ, ಮಾನಿನಿ, ಜೂಜುಜುಗಾರಿ, ಮೃಗವಿಹಾರ, ದಿವಾಸ್ವಪ್ನ ಮತ್ತು ದಿವಾಮೈಥುನ ) ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ.ಅತಿಯಾದ ಮೊಬೈಲ್ ಬಳಕೆ, ಸಮೂಹ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ ಹರಿಸಬೇಕು.ಇವುಗಳಿಂದ ಹೊರಬರಲು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ. ದೃಢ ನಿರ್ಧಾರ, ಸಂಧಾನ ಕೌಶಲ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ, ಸಂವಹನ ಕುಶಲತೆ ವ್ಯಕ್ತಿ – ವ್ಯಕ್ತಿ ಸಂಬಂಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೈರ್ಯ, ಸಮಸ್ಯಾ ಪರಿಹಾರ, ಪರಾನುಭೂತಿ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ. ದೈವಶಕ್ತಿ, ಗುರುಶಕ್ತಿ, ಜನಶಕ್ತಿ, ಇಚ್ಛಾಶಕ್ತಿ ಈ ನಾಲ್ಕು ಪ್ರಮುಖ ಅಂಶಗಳಲ್ಲಿ ನಂಬಿಗಳನ್ನಿಟ್ಟು ನಡೆದರೆ ವಿದ್ಯಾರ್ಥಿ ಒಬ್ಬ ಆದರ್ಶ ವಿದ್ಯಾರ್ಥಿಯಾಗಿ ಬೆಳೆದು ತನ್ನ ಜೀವನವನ್ನು ತಾನೇ ರೂಪಿಸಿಕೊಳ್ಳುತ್ತಾನೆ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ. ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ರಮೇಶ್ ಮೂಲ್ಯ, ರವಿ, ನಾಗರಾಜ್, ಶಿವಕುಮಾರ್, ರಮೇಶ್, ಜೆಸ್ಮಿ, ಸಹನ, ಚಾಂದಿನಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯ ಮೇಲ್ವಿಚಾರಕ ಸುನಿಲ್ ಕುಮಾರ್, ನಾಪೋಕ್ಲು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಒಕ್ಕೂಟದ ಅಧ್ಯಕ್ಷರಾದ ಶರವಣ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಮೇಲ್ವಿಚಾರಕರಾದ ಸುನಿಲ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ, ಉಪನ್ಯಾಸಕರುಗಳಾದ ಚಾಂದಿನಿ ಸ್ವಾಗತಿಸಿ, ರಮೇಶ್ ನಿರೂಪಿಸಿ, ರಮೇಶ್ ಮೂಲ್ಯ ವಂದಿಸಿದರು.